
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತವು ಜನರ ಭಾಗವಹಿಸುವಿಕೆ, ಬಹುತ್ವ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ಆಧಾರದ ಮೇಲೆ ನಿರ್ಮಾಣಗೊಂಡ ರಾಷ್ಟ್ರದ ಶಕ್ತಿಗೆ ಪ್ರಬಲ ಉದಾಹರಣೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂದೇಶ ನೀಡಿರುವ ಅವರು, ಕರ್ನಾಟಕಕ್ಕೂ ತನ್ನದೇ ಆದ ಗಮನಾರ್ಹ ಪ್ರಜಾಪ್ರಭುತ್ವ ಪರಂಪರೆ ಇದೆ. ಶತಮಾನಗಳ ಹಿಂದೆಯೇ ಸಮಾಜದ ವಿವಿಧ ವರ್ಗಗಳ ಜನರು ಒಂದೆಡೆ ಸೇರಿ ವಿಚಾರ ವಿನಿಮಯ ನಡೆಸಿ, ಮುಕ್ತ ಸಂವಾದದಲ್ಲಿ ತೊಡಗಿದ್ದ ಅನುಭವ ಮಂಟಪವು ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ತಿಳಿಸಿದ್ದಾರೆ.
ಸಮಾಜದ ಎಲ್ಲ ವರ್ಗಗಳನ್ನೂ ಒಳಗೊಳ್ಳುವ ಮತ್ತು ಸಾಮೂಹಿಕ ಹೊಣೆಗಾರಿಕೆಯ ಆ ಮನೋಭಾವ ಇಂದಿಗೂ ಪ್ರಸ್ತುತವಾಗಿದೆ. ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಮಾನವ ಘನತೆಯ ಮೌಲ್ಯಗಳನ್ನು ಎತ್ತಿಹಿಡಿಯುವ ಸಂಕಲ್ಪವನ್ನು ಎಲ್ಲರೂ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.
ಪ್ರತಿಯೊಬ್ಬ ವ್ಯಕ್ತಿಯೂ ಆತ್ಮವಿಶ್ವಾಸದಿಂದ ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಸಮಾಜದ ಹಾಗೂ ದೇಶದ ಸಾಮೂಹಿಕ ಭವಿಷ್ಯ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುವಂತಹ ಸಮಾಜವನ್ನು ಕಟ್ಟಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಅವರು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.