
ಕೋಲಾರ, 17 ಸೆಪ್ಟೆಂಬರ್ (ಹಿ.ಸ)
ಆ್ಯಂಕರ್ : ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ನೌಕರರಿಗೆ ಕಳೆದ ಮೂರು ತಿಂಗಳಿಂದ ವೇತನ ಬಿಡುಗಡೆಯಾಗದೆ ಸಂಕಷ್ಟ ಎದುರಾಗಿದೆ. ಕೂಡಲೇ ಬಾಕಿ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಿಲ್ಲಾ ಪಂಚಾಯಿತಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ತಿಮ್ಮರಾಯಪ್ಪ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ರೈತ ಸಂಘದ ಯುವ ಘಟಕದ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಮಾತನಾಡಿ ಅಲ್ಪ ಸಂಬಳಕ್ಕೆ ಕೆಲಸ ಮಾಡುತ್ತಿರುವ ಬಿಸಿಯೂಟ ಮಾತೆಯರಿಗೆ ಬರಬೇಕಾದ ೪,೬೦೦ ರಿಂದ ೪,೭೦೦ ರೂಪಾಯಿ ವೇತನವನ್ನು ನೀಡಲು ಸರ್ಕಾರದ ಬಳಿ ಹಣವಿಲ್ಲವೇ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಿಸಿಯೂಟ ಮಾತೆಯರ ಕಷ್ಟವನ್ನು ಅರ್ಥ ಮಾಡಿಕೊಂಡು ಕೂಡಲೇ ಎರಡು-ಮೂರು ತಿಂಗಳ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಜಿಲ್ಲಾ ಪಂಚಾಯಿತಿ ಮುಂದೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರದ ೩,೬೦೦ ರೂಪಾಯಿ ಹಾಗೂ ಕೇಂದ್ರ ಸರ್ಕಾರದ ೧,೦೦೦ ರೂಪಾಯಿ ಸೇರಿ ಒಟ್ಟು ವೇತನ ಪ್ರತಿ ತಿಂಗಳು ೫ನೇ ತಾರೀಖಿನ ಒಳಗಾಗಿ ಬಿಡುಗಡೆಯಾಗಬೇಕಾಗಿತ್ತು. ಆದರೆ ಮೂರು ತಿಂಗಳು ಕಳೆದರೂ ವೇತನ ಸಿಗದೆ ಬಿಸಿಯೂಟ ಮಾತೆಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಹಾಗೂ ಸಂಬ0ಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ವೇತನ ಬಿಡುಗಡೆ ಮಾಡಬೇಕು. ತಪ್ಪಿದ್ದಲ್ಲಿ ಶಾಲೆಗಳಲ್ಲಿ ಅಡುಗೆ ಮಾಡುವ ಕೆಲಸವನ್ನು ಸ್ಥಗಿತಗೊಳಿಸಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಸಿಯೂಟ ಮುಖಂಡರಾದ ಮಮತಾ, ರಾಧಮ್ಮ, ಎಸ್. ವರಲಕ್ಷ್ಮಿ, ನಾರಾಯಣಮ್ಮ ಹಾಗೂ ಕೋಲಾರ ತಾಲ್ಲೂಕು ಪಂಚಾಯಿತಿ ಅಕ್ಷರ ದಾಸೋಹ ಅಧಿಕಾರಿ ಹೇಮಂತ್ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್