
ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಉತ್ತರಾಖಂಡದಲ್ಲಿ ನಡೆದಿರುವ ಘಟನೆ ಬಿಜೆಪಿಯ ದ್ವಂದ್ವ ನಿಲುವಿಗೆ ಮತ್ತೊಂದು ಸಾಕ್ಷಿಯಾಗಿದೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
ದಲಿತ ಸಮುದಾಯದ ಹಿರಿಯ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲಿ ‘ಶುದ್ಧೀಕರಣ’ದ ಹೆಸರಿನಲ್ಲಿ ನಡೆದ ಘಟನೆ ಕುರಿತು ಪ್ರಶ್ನೆ ಎತ್ತಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕಾದ ಸರ್ಕಾರ ಮೌನ ವಹಿಸಿರುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಇದಕ್ಕಿಂತ ವಿಚಿತ್ರವೆಂದರೆ, ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಅವರ ಭಾವಚಿತ್ರ ಇಟ್ಟು ‘ಬುದ್ಧಿ ಶುದ್ಧಿ’ ಯಜ್ಞ ನಡೆಸಿದ್ದಾರೆ. ಇದು ರಾಜಕೀಯ ಪಿತೂರಿ ಹಾಗೂ ಸಂವಿಧಾನದ ಮೌಲ್ಯಗಳನ್ನು ಅವಮಾನಿಸುವ ಮನಸ್ಥಿತಿ ಎಂದು ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನವು ಜಾತಿ, ಧರ್ಮ ಹಾಗೂ ವರ್ಗದ ಆಧಾರದ ಮೇಲೆ ಯಾರನ್ನೂ ಕೀಳಾಗಿ ಕಾಣಬಾರದು ಎಂಬ ಸಮಾನತೆಯ ಸಂದೇಶ ನೀಡಿದೆ. ಜಾತಿ ಆಧಾರಿತ ಅವಮಾನ ಅಥವಾ ತಾರತಮ್ಯದ ಆರೋಪಗಳು ಬಂದಾಗ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.
ಪ್ರಶ್ನಿಸುವವರ ವಿರುದ್ಧ ಪ್ರಕರಣ ದಾಖಲಿಸುವ ಬದಲು ಸರ್ಕಾರ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು. ಸಂವಿಧಾನ ರಕ್ಷಣೆಯ ಹೋರಾಟದಲ್ಲಿ ಬಿಜೆಪಿಯ ಬೆದರಿಕೆ ರಾಜಕಾರಣಕ್ಕೆ ಕಾಂಗ್ರೆಸ್ ತಲೆಬಾಗುವುದಿಲ್ಲ ಎಂದು ರಾಮಲಿಂಗಾರೆಡ್ಡಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.