
ನವದೆಹಲಿ, 03 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಬೆಲ್ಜಿಯಂ ಪ್ರಧಾನಿ ಬಾರ್ಟ್ ಡಿ ವೀವರ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಿದರು. ಉಭಯ ನಾಯಕರು ದ್ವಿಪಕ್ಷೀಯ ಬಾಂಧವ್ಯದ ವಿವಿಧ ಆಯಾಮಗಳ ಜತೆಗೆ ಪ್ರಾದೇಶಿಕ ಹಾಗೂ ಜಾಗತಿಕ ಬೆಳವಣಿಗೆಗಳ ಬಗ್ಗೆಯೂ ಮಾತುಕತೆ ನಡೆಸಿದರು.
ಭಾರತಕ್ಕೆ ಮೂರು ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ಡಿ ವೀವರ್, ಇದಕ್ಕೂ ಮುನ್ನ ರಾಜಘಾಟ್ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಫೆಬ್ರವರಿ 2025ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅವರ ಮೊದಲ ಭಾರತ ಪ್ರವಾಸ ಇದಾಗಿದೆ. ಅವರೊಂದಿಗೆ ಬೆಲ್ಜಿಯಂ ರಕ್ಷಣಾ ಸಚಿವ ಥಿಯೋ ಫ್ರಾಂಕೆನ್ ಕೂಡ ಭಾರತಕ್ಕೆ ಆಗಮಿಸಿದ್ದಾರೆ.
ವಿದೇಶಾಂಗ ಸಚಿವಾಲಯದ ಪ್ರಕಾರ, ಭಾರತ-ಬೆಲ್ಜಿಯಂ ನಡುವಿನ ನಿಕಟ ಹಾಗೂ ಬಹುಮುಖ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವುದು ಭೇಟಿಯ ಪ್ರಮುಖ ಉದ್ದೇಶವಾಗಿದೆ. ವ್ಯಾಪಾರ ಮತ್ತು ಹೂಡಿಕೆ, ರಕ್ಷಣಾ ಮತ್ತು ಭದ್ರತೆ, ತಂತ್ರಜ್ಞಾನ, ನವೀಕರಿಸಬಹುದಾದ ಇಂಧನ, ಸಂಪರ್ಕ ಹಾಗೂ ಜನರ ನಡುವಿನ ಬಾಂಧವ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸುವ ಕುರಿತು ಚರ್ಚೆ ನಡೆಯಲಿದೆ.
ಭಾರತ-ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ಭಾರತೀಯ ಕೈಗಾರಿಕಾ ಒಕ್ಕೂಟ ಆಯೋಜಿಸುವ ವ್ಯಾಪಾರ ಕಾರ್ಯಕ್ರಮದಲ್ಲಿ ಬೆಲ್ಜಿಯಂ ಪ್ರಧಾನಿ ಮುಖ್ಯ ಭಾಷಣ ಮಾಡಲಿದ್ದಾರೆ. ಬಳಿಕ ಅವರು ಮುಂಬೈಗೆ ತೆರಳಿ ವಜ್ರ, ಬಂದರು ಮತ್ತು ಸರಕು ಸಾಗಣೆ ಕ್ಷೇತ್ರದ ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಭಾರತ-ಬೆಲ್ಜಿಯಂ ಆರ್ಥಿಕ ಸಂಬಂಧದಲ್ಲಿ ವಜ್ರ ವ್ಯಾಪಾರಕ್ಕೆ ಪ್ರಮುಖ ಸ್ಥಾನವಿದ್ದು, ಬೆಲ್ಜಿಯಂನ ಆಂಟ್ವರ್ಪ್ ಜಾಗತಿಕ ವಜ್ರ ವಹಿವಾಟಿನ ಪ್ರಮುಖ ಕೇಂದ್ರವಾಗಿದೆ. 2025-26ರಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ 13 ಬಿಲಿಯನ್ ಡಾಲರ್ಗೂ ಅಧಿಕವಾಗಿತ್ತು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.