
ಕಲಬುರಗಿ, 03 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಹೊರವಲಯದಲ್ಲಿ ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮೂರು ತಿಂಗಳ ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.
ಶರಣಮ್ಮ (30) ಮತ್ತು ಮೂರು ತಿಂಗಳ ಮಗು ರಾಘವೇಂದ್ರ ಮೃತ ದುರ್ದೈವಿಗಳು. ಶರಣಮ್ಮ ಹಾಗೂ ಅವರ ಕುಟುಂಬ ವರ್ಗದವರು ಆಟೋದಲ್ಲಿ ವಾಡಿ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಲಾರಿ ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಪೆಟ್ಟುಬಿದ್ದು ತಾಯಿ ಮತ್ತು ಮಗು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ದುರ್ಘಟನೆಯಲ್ಲಿ ಮೃತರ ಕುಟುಂಬದವರಾದ ಸಾಬಮ್ಮ (ಅತ್ತೆ) ಹಾಗೂ ಆಟೋ ಚಾಲಕ ಖಾಜಾ ಪಟೇಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ವಾಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ವಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R