
ಬೆಂಗಳೂರು, 04 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಬರಗಾಲ ಪರಿಹಾರ ಹಾಗೂ ರೈತರ ಸಾಲ ಮನ್ನಾಕ್ಕೆ ನೆರವು ಕೋರಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲವಿದೆ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಹಾಗೂ ಬರ ಪರಿಹಾರಕ್ಕೆ ನೆರವು ನೀಡುವ ಜವಾಬ್ದಾರಿ ಹೊರಬೇಕು ಎಂದು ಆಗ್ರಹಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಎಲ್ಲ ಪಕ್ಷಗಳ ನಾಯಕರು ತಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರದಿಂದ ಅನುದಾನ ಹಾಗೂ ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಬೇಕು ಎಂದರು.
ಬರ ಪರಿಸ್ಥಿತಿಯಲ್ಲಿ ವಿಪಕ್ಷಗಳ ರಾಜಕಾರಣ
ರಾಜ್ಯದ ಬರ ಪರಿಸ್ಥಿತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ರೈತರ ಸಮಸ್ಯೆ ಮತ್ತು ಬರ ಪರಿಸ್ಥಿತಿಯ ಅಧ್ಯಯನಕ್ಕೆ ವಿಪಕ್ಷಗಳಿಗೆ ಆಸಕ್ತಿ ಇಲ್ಲ. ನೈಜ ಪರಿಸ್ಥಿತಿಯನ್ನು ಅರಿಯುವ ಬದಲು ವಿಪಕ್ಷಗಳು ರಾಜಕಾರಣ ಮಾಡುತ್ತಿವೆ ಎಂದು ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಬರ ಪರಿಸ್ಥಿತಿ ಕುರಿತು ಚರ್ಚಿಸಲು ಜೆಡಿಎಸ್ ಮತ್ತು ಬಿಜೆಪಿ ಶಾಸಕರೇ ತಮ್ಮ ಬಳಿ ಬಂದು ಮನವಿ ಮಾಡಿದ್ದಾರೆ. ಹೀಗಾಗಿ ಪ್ರತ್ಯೇಕವಾಗಿ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದರು.
ಮೂರು ದಿನಗಳ ವಿಶೇಷ ಅಧಿವೇಶನ
ರೈತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲು ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ. ರಾಜ್ಯದ ಬರ ಪರಿಸ್ಥಿತಿ, ರೈತರ ತೊಂದರೆಗಳು ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿಗೆ ರಾಜ್ಯ ಸಲ್ಲಿಸಬೇಕಾದ ಆಕ್ಷೇಪಣೆಗಳ ಬಗ್ಗೆ ಮಾತ್ರ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಅಧಿವೇಶನವನ್ನು ಏಳು ದಿನಗಳಿಗೆ ವಿಸ್ತರಿಸಬೇಕೆಂಬ ವಿಪಕ್ಷಗಳ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲರ ಅಭಿಪ್ರಾಯಗಳನ್ನು ಆಲಿಸಲಾಗುವುದು. ಎಲ್ಲರೂ ಜನಪ್ರತಿನಿಧಿಗಳಾಗಿದ್ದು, ಮುಕ್ತವಾಗಿ ಚರ್ಚೆ ನಡೆಯಲಿ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.